ಪಬ್ಲಿಕ್ ಅಲರ್ಟ್ ನ್ಯೂಸ್ :-
ಪಾಸ್ಪೋರ್ಟ್ ಕಚೇರಿ ಕಟ್ಟಡವನ್ನು ಖಾಸಗಿಗೆ ವಹಿಸುವುದು ಅಕ್ಷಮ್ಯ: ಯದುವೀರ್ ಒಡೆಯರ್
ಜನರಿಗೆ ಅನುಕೂಲವಾಗುವ ಸೌಲಭ್ಯಗಳನ್ನು ಕಸಿದುಕೊಳ್ಳುವುದು ಬೇಡ: ಸಂಸದರು
ಮೈಸೂರು, ಡಿ. 27: ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ನಿರ್ಮಿಸಲಾಗಿರುವ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ಕಟ್ಟಡವನ್ನು ಖಾಸಗಿ ಉದ್ದೇಶಕ್ಕೆ ಬಳಸುವುದು ಅಕ್ಷಮ್ಯ. ಇದೊಂದು ಗಂಭೀರ ವಿಷಯವಾಗಿದ್ದು, ಈ ಬಗ್ಗೆ ಸಂಬಂಧಪಟ್ಟ ಸಚಿವಾಲಯಕ್ಕೆ ಮಾಹಿತಿ ನೀಡಿ ಕ್ರಮ ಕೈಗೊಳ್ಳಲು ಮನವಿ ಸಲ್ಲಿಸಲಾಗುವುದು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಬಿಡುಗಡೆ ಮಾಡಿರುವ ಸಂಸದ ಯದುವೀರ್ ಒಡೆಯರ್, ಈ ವಿಷಯದಲ್ಲಿ ಯಾವುದೇ ಕಾರಣಕ್ಕೂ ರಾಜೀ ಇಲ್ಲ ಎಂದು ತಿಳಿಸಿದ್ದಾರೆ.
ಇಟ್ಟಿಗೆಗೂಡು ಪ್ರದೇಶದಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಪಾಸ್ಪೋರ್ಟ್ ಕಚೇರಿ ಸ್ಥಾಪನೆಗಾಗಿ ನಿರ್ಮಿಸಲಾದ ಸರ್ಕಾರಿ ಕಟ್ಟಡವನ್ನು ಹಲವು ವರ್ಷಗಳಿಂದ ಅದರ ಉದ್ದೇಶಕ್ಕೆ ಬಳಸದೆ ಖಾಸಗಿ ವ್ಯಕ್ತಿಗಳಿಗೆ/ಸಂಸ್ಥೆಗಳಿಗೆ ನೀಡಲಾಗಿದೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಇದು ಅತ್ಯಂತ ಗಂಭೀರ ಮತ್ತು ನಿಯಮಬಾಹಿರ ವಿಷಯವಾಗಿದೆ ಎಂದು ವಿವರಿಸಿದ್ದಾರೆ.
ಸಾರ್ವಜನಿಕ ಉದ್ದೇಶಕ್ಕಾಗಿ ಸರ್ಕಾರದ ಹಣದಿಂದ ನಿರ್ಮಿಸಲಾದ ಕಟ್ಟಡವನ್ನು ಖಾಸಗಿ ಬಳಕೆಗೆ ನೀಡಿರುವುದು ನಿಯಮಗಳ ಉಲ್ಲಂಘನೆಯಾಗಿದೆ. ಇದರಿಂದ ಸಾರ್ವಜನಿಕರಿಗೆ ಸಿಗಬೇಕಾದ ಸೌಲಭ್ಯಗಳನ್ನು ಕಸಿದುಕೊಂಡಂತಾಗುತ್ತದೆ ಎಂದು ಸಂಸದರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು, ವಿಷಯವನ್ನು ತಕ್ಷಣ ಪರಿಶೀಲಿಸಿ, ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಮತ್ತು ಪಾಸ್ಪೋರ್ಟ್ ಕಚೇರಿಯನ್ನು ಅದೇ ಕಟ್ಟಡದಲ್ಲಿ ಶೀಘ್ರದಲ್ಲಿ ಪ್ರಾರಂಭಿಸುವಂತೆ ಸೂಚಿಸಲಾಗಿದೆ ಎಂದು ಯದುವೀರ್ ಒಡೆಯರ್ ಹೇಳಿದ್ದಾರೆ.
ಅಗತ್ಯಬಿದ್ದರೆ ಸಂಬಂಧಬಿಟ್ಟ ಸಚಿವರಿಗೂ ಪತ್ರ ಬರೆದು ಸೂಕ್ತ ಸೂಚನೆ ನೀಡುವಂತೆ ಮನವಿ ಸಲ್ಲಿಸುತ್ತೇನೆ ಎಂದು ಒಡೆಯರ್ ಸ್ಪಷ್ಟಪಡಿಸಿದ್ದಾರೆ.
ಮೈಸೂರು ಮತ್ತು ಸುತ್ತಮುತ್ತಲ ಪ್ರದೇಶದ ಜನರಿಗೆ ಪಾಸ್ಪೋರ್ಟ್ ಸೇವೆಗಳು ಸುಲಭವಾಗಿ ಲಭ್ಯವಾಗಬೇಕಾದ್ದರಿಂದ, ಈ ವಿಷಯದಲ್ಲಿ ಯಾವುದೇ ವಿಳಂಬವಾಗದಂತೆ ಸರ್ಕಾರ ಹಾಗೂ ಸಂಬಂಧಿಸಿದ ಅಧಿಕಾರಿಗಳು ತ್ವರಿತವಾಗಿ ಕ್ರಮ ವಹಿಸಬೇಕು ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.
