ಪಬ್ಲಿಕ್ ಅಲರ್ಟ್
ಮೈಸೂರು:ರಾಜ್ಯ ಸರ್ಕಾರದ ಒಳ ಮೀಸಲಾತಿ ವರ್ಗೀಕರಣ ವಿರೋಧಿಸಿ ಬಂಜಾರ (ಲಂಬಾಣಿ) ಸೇವಾ ಸಂಘದ ವತಿಯಿಂದ ಸೆ.೧೦ ರಂದು ಬೆಂಗಳೂರು ಚಲೋವನ್ನು ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ ೧೦.೩೦ಕ್ಕೆ ಅಲ್ಲಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಸಮಾವೇಶ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಎಂ. ಸುಂದರ್ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಡನೆ ಮಾತನಾಡಿ, ಮೈಸೂರು ಜಿಲ್ಲೆಯಿಂದ ಸುಮಾರು ೧೫೦ ಮಂದಿ ಅಲ್ಲಿಗೆ ಹೊರಡಲಿದ್ದಾರೆ. ಅಲ್ಲಿ ಅಂದು ಒಟ್ಟಾರೆ ಒಂದು ಲಕ್ಷ ಮಂದಿ ಸೇರಲಿದ್ದಾರೆ. ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸಲು ರಚನೆಯಾಗಿದ್ದ ನಿವೃತ್ತ ನ್ಯಾ. ನಾಗಮೋಹನ್ ದಾಸ್ ಏಕ ಸದಸ್ಯ ಆಯೋಗ ಇತ್ತೀಚೆಗೆ ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಕೆಲ ಬದಲಾವಣೆಯೊಂದಿಗೆ ರಾಜ್ಯ ಸರ್ಕಾರ ಜಾರಿಗೊಳಿಸಿರುವುದು ಆತಂಕಕ್ಕೆ ಕಾರಣವಾಗಿದೆ ಎಂದರು.
ಈ ವರದಿಯ ಸಾರಾಂಶಗಳು ವಾಸ್ತವಕ ಅಂಕಿ ಸಂಖ್ಯೆಗಳಿAದ ದೂರವಾಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಶಿಕ್ಷಣ, ಉದ್ಯೋಗ, ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಗತಿಯ ಅಂಕಿ ಅಂಶಗಳು ದಮನಿತ ಸಮುದಾಯಗಳ ಅನುಮಾನಕ್ಕೆ ಕಾರಣವಾಗಿದೆ. ಕೆಲ ಇಲಾಖೆಗಳು ಪರಿಶಿಷ್ತ ಜಾತಿ ಅಂಕಿ ಸಂಖ್ಯೆ ನೀಡಿಲ್ಲ. ಉದ್ಯೋಗಕ್ಕಾಗಿ ದೂರದ ಊರುಗಳಿಗೆ ಗುಳೇ ಹೋಗಿರುವ ಸಮುದಾಯದವರನ್ನು ಪರಿಗಣಿಸಿಲ್ಲ. ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಅಲೆಮಾರಿ ಸಮುದಾಯವನ್ನು ಯಾವುದೇ ದೃಷ್ಟಿಕೋನದಿಂದಲೂ ಹೋಂದಾಣಿಕೆ ಆಗದ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯದ ಸಿ ವರ್ಗದೊಡನೆ ಸೇರಿಸಿ ಅಲೆಮಾರಿಗಳಿಗೆ ಮೀಸಲಾತಿಯಿಂದ ವಂಚನೆ ಮಾಡಲು ಮುಂದಾಗಿದೆ ಎಂದು ಆರೋಪಿಸಿದರು.
ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಿ ಸಿ ವರ್ಗದಲ್ಲಿ ಬರುವ ಬಂಜಾರ, ಕೊರಚ, ಕೊರಮ ಸಮುದಾಯದವರಿಗೂ ಶೇ. ೭ ರಷ್ಟು ಮೀಸಲಾತಿ ನಿಗದಿಗೊಳಿಸಲು ಸರ್ಕಾರ ಮುಂದಾಗಬೇಕು ಎಂಬಿವೇ ಮೊದಲಾದ ಬೇಡಿಕೆ ಈಡೇರಿಕೆಗೆ ಅಂದು ಸಮಾವೇಶ ನಡೆಯಲಿದೆ ಎಂದರು.
