ಪಬ್ಲಿಕ್ ಅಲರ್ಟ್ ನ್ಯೂಸ್:-ಮುಖ್ಯಮಂತ್ರಿಗಳ ಮೂಲಭೂತ ಸೌಕರ್ಯಗಳ ಕಾಮಗಾರಿಗಳ ಕೆಲಸಗಳನ್ನು ಚುರುಕುಗೊಳಿಸಿ: ಲಕ್ಷ್ಮಿಕಾಂತ ರೆಡ್ಡಿ ಜಿ
ಮೈಸೂರು, ಜೂನ್ 20(ಕರ್ನಾಟಕ ವಾರ್ತೆ):-
ಮುಖ್ಯಮಂತ್ರಿಗಳ ಮೂಲಭೂತ ಸೌಕರ್ಯಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಶೇ 80 ರಷ್ಟು ಅನುದಾನ ಬಿಡುಗಡೆಯಾಗಿರುತ್ತದೆ. ಕೆಲಸ ಚುರುಕುಗೊಳಿಸಿ ಕಾಮಗಾರಿ ಪ್ರಾರಂಭಿಸುವಂತೆ ಜಿಲ್ಲಾದಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ನಡೆದ ಮುಖ್ಯಮಂತ್ರಿಗಳ ಮೂಲಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಈಗಾಗಲೇ ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನವನ್ನು ಬಳಸಿ ಕಾಮಗಾರಿಗಳನ್ನು ಪೂರ್ಣಗೊಳಿಸದಿದ್ದಲ್ಲಿ ಹೊಸದಾಗಿ ಅನುದಾನ ನೀಡುವುದಿಲ್ಲ. ಅನುಷ್ಠಾನ ಇಂಜಿನಿಯರಿಂಗ್ ಇಲಾಖೆಗಳು ಕಾಮಗಾರಿಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಎಂದರು.
ಮೈಸೂರು ಮಹಾಮಗರ ಪಾಲಿಕೆ ವ್ಯಾಪ್ತಿಯ ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ 18.75 ಕೋಟಿ ರೂ, ಚಾಮರಾಜ ವಿಧಾನಸಭಾ ಕ್ಷೇತ್ರದ 36.05 ಕೋಟಿ ರೂ ಹಾಗೂ ನರಸಿಂಹ ರಾಜ ವಿಧಾನಸಭಾ ಕ್ಷೇತ್ರದ 35 ಕೋಟಿ ರೂ ವೆಚ್ಚದ ಕಾಮಗಾರಿಗಳನ್ನು ಈ ಯೋಜನೆಯಡಿ ಕೈಗೊಳ್ಳುತ್ತಿದ್ದು, ಬಾಕಿ ಇರುವ 7 ಪ್ಯಾಕೇಜ್ ಗಳ ಆಡಳಿತಾತ್ಮಕ ಅನುಮೋದನೆ ಪಡೆದು ಕಾಮಗಾರಿ ಪ್ರಾರಂಭಿಸುವಂತೆ ತಿಳಿಸಿದರು.
ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದವರಿಗೆ ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಮುಜರಾಯಿಗೆ ಸಂಬಂಧಿಸಿದ 3 ಕೋಟಿ ರೂ ವೆಚ್ಚದಲ್ಲಿ 5 ರಿಂದ 10 ಲಕ್ಷ ರೂ ವೆಚ್ಚದಲ್ಲಿ 46 ಕಾಮಗಾರಿಗಳಿದ್ದು, 14 ಕೆಲಸ ಪ್ರಗತಿಯಲ್ಲಿದ್ದು, 32 ಕೆಲಸಗಳು ಅಗ್ರಿಮೆಂಟ್ ಮಾಡಿಕೊಳ್ಳಬೇಕಿದ್ದು ಶೀಘ್ರವಾಗಿ ಪ್ರಾರಂಭಿಸುವಂತೆ ತಿಳಿಸಿದರು.
ಕೆ.ಆರ್.ಐ.ಡಿ.ಎಲ್ ಹಾಗೂ ನಿರ್ಮಿತಿ ಕೇಂದ್ರದವರಿಗೆ ನೀಡಲಾಗಿರುವ ಕೆಲಸಗಳಿಗೆ 15 ದಿನದೊಳಗೆ ಆಡಳಿತಾತ್ಮಕ ಅನುಮೋದನೆ ಪಡೆದು ಕೆಲಸಗಳನ್ನು ಪ್ರಾರಂಭಿಸಬೇಕು.
ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಮುಜರಾಯಿ ಸೇರಿದಂತೆ ಕಾಮಗಾರಿಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತೊಂದರೆ ಇದ್ದಲ್ಲಿ ಬಗೆಹರಿಸಿಕೊಂಡು ಕಾಮಗಾರಿಗಳು ಪ್ರಾರಂಭಿಸಿ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆ ಅಧೀಕ್ಷಕ ಇಂಜಿನಿಯರ್ ಮಂಜು, ನಿರ್ಮಿತಿ ಕೇಂದ್ರದ ಪಿ.ಡಿ ಮಹೇಶ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
