ಪಬ್ಲಿಕ್ ಅಲರ್ಟ್ ನ್ಯೂಸ್:-ಮಾನವ ಅಭಿವೃದ್ಧಿ ವರದಿ ಯನ್ನು ನಿಖರವಾಗಿ ನೀಡಿ: ಇದು ಮುಂದಿನ ಅಭಿವೃದ್ಧಿಗೆ ದಿಕ್ಸೂಚಿಯಾಗುತ್ತದೆ : ಎಸ್ ಯುಕೇಶ್ ಕುಮಾರ್
ಮೈಸೂರು ಜನವರಿ 20 (ಕರ್ನಾಟಕ ವಾರ್ತೆ) ಮಾನವ ಅಭಿವೃದ್ಧಿ ವರದಿ ಯನ್ನು ಸಂಬಂಧಿಸಿದ ಇಲಾಖೆಗಳು ನಿಖರವಾಗಿ ನೀಡಬೇಕು ಇದು ಮುಂದಿನ ಅಭಿವೃದ್ಧಿಗೆ ದಿಕ್ಸೂಚಿಯಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎಸ್ ಯುಕೇಶ್ ಕುಮಾರ್ ಅವರು ತಿಳಿಸಿದರು
ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಾನವ ಅಭಿವೃದ್ಧಿ ವರದಿ 2025 ಮತ್ತು ಸಮಗ್ರ ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆ 2031 ರ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲಾ ಮಾನವ ಅಭಿವೃದ್ಧಿ ವರದಿಯನ್ನು ನಿಖರವಾಗಿ ತಯಾರಿಸಬೇಕು. ಇದೆ ಅಂಕಿ ಅಂಶದ ಆಧಾರದ ಮೇಲೆ ಮುಂದಿನ ಅಭಿವೃದ್ಧಿಗೆ ಪೂರಕವಾಗುತ್ತದೆ. ಪೆಬ್ರವರಿ 10 ರೊಳಗೆ ವರದಿಯನ್ನು ನೀಡಬೇಕು ಎಂದರು.
ಇಲಾಖೆಗಳಿಗೆ ಬಂದಿರುವ ಅನುಧಾನ ಯಾವುದೇ ರೀತಿ ವ್ಯರ್ಥವಾಗಬಾರದು. ಅನುಧಾನ ಮಾರ್ಚ್ ವೇಳೆಗೆ ಶೇಕಡಾ 100 ರಷ್ಟು ಸದ್ಬಳಕೆ ಆಗಬೇಕು. ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಯೋಜನೆ ರೂಪಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಎಸ್ ಐ ಆರ್ ಡಿ ಸಂಸ್ಥೆಯ ಸಮಾಲೋಚಕರಾದ ಗಣೇಶ್ ಪ್ರಸಾದ್ ಅವರು ಮಾತನಾಡಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ 2025 ಹಾಗೂ ಸಮಗ್ರ ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆ 2031 ಕುರಿತು ಕಾರ್ಯಗಾರವನ್ನು ಹಮ್ಮಿಕೊಂಡಿದ್ದು, ಇದು ದೇಶದ ಪ್ರಗತಿಯನ್ನು ತಿಳಿಸುವ ಕನ್ನಡಿಯಾಗಿರುತ್ತದೆ. 16 ನೆಯ ಹಣಕಾಸು ಆಯೋಗದ ಅನುಧಾನ ಏಪ್ರಿಲ್ 1 ರಿಂದ ಜಾರಿಗೆ ಬರುತ್ತದೆ. ಇದು 2026 ರಿಂದ 2031 ರ ವರೆಗೆ ಇರುತ್ತದೆ. ಮಾನವ ಅಭಿವೃದ್ಧಿ ವರದಿಯ ಆಧಾರದ ಮೇಲೆ ಗ್ರಾಮ ಪಂಚಾಯತ್, ತಾಲ್ಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಗಳಿಗೆ ಅನುಧಾನ ಹಂಚಿಕೆ ಆಗುತ್ತದೆ. ಅಲ್ಲದೆ 2026 ರಲ್ಲೆ ಗ್ರಾಮ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳು ನಡೆಯುತ್ತವೆ ಇದರ ಅವಧಿಯು 2026 ರಿಂದ 2031 ರವರೆಗೆ ಇರುತ್ತದೆ ಎಂದು ತಿಳಿಸಿದರು.
ತಾಯಂದಿರ ಮರಣ, ಶಿಶು ಮರಣ, ಶಾಲೆ ಬಿಟ್ಟ ಮಕ್ಕಳ ಸಂಖ್ಯೆ, ಇವುಗಳನ್ನು ನಿಖರವಾಗಿ ದಾಖಲಿಸಬೇಕು. ಗ್ರಾಮ ಪಂಚಾಯತ್ ಮಟ್ಟದಲ್ಲಿ 17 ಮಾನದಂಡಗಳನ್ನು ಗುರುತಿಸಿ ನೀಡಲಾಗಿದೆ. ಅದರ ಆಧಾರದ ಮೇಲೆ ವರದಿ ತಯಾರಿಸಬೇಕು. ಜೀವನದ ಗುಣಮಟ್ಟ, ಶಿಕ್ಷಣ ಮತ್ತು ಆರೋಗ್ಯವನ್ನು ಮೂಲ ಮಾನದಂಡವಾಗಿ ಪರಿಗಣಿಸಲಾಗುತ್ತದೆ. ಕರ್ನಾಟಕದಲ್ಲಿ ಬಡತನ ರೇಖೆಗಿಂತ 26% ಜನರು ಇದ್ದಾರೆ. ಭಾರತದಲ್ಲಿ 80% ಸಾಕ್ಷರತೆ ಇದೆ. ಆಹಾರ ಉತ್ಪಾದನೆಯಲ್ಲಿ 2 ನೆ ಸ್ಥಾನದಲ್ಲಿ ಇದ್ದೇವೆ ಎಂದು ತಿಳಿಸಿದರು.
ಭಾರತದಲ್ಲಿ ಪ್ರತಿ 10 ವರ್ಷಕ್ಕೆ ಒಮ್ಮೆ ಜನಗಣತಿ ಮಾಡಲಾಗುತ್ತದೆ. ರೈಲ್ವೆ ಸಾರಿಗೆಯಲ್ಲಿ ಪ್ರಪಂಚದಲ್ಲಿಯೇ ಮೊದಲ ಸ್ಥಾನದಲ್ಲಿ ಇದ್ದೇವೆ. ಆರೋಗ್ಯ ಸೇವೆ ಉತ್ತಮವಾಗಿದೆ. ನಮ್ಮ ದೇಶ ಸಾಕಷ್ಟು ಪ್ರಗತಿ ಸಾಧಿಸಿದ್ದರೂ ಸಹ ಹಲವು ಕೊರತೆಗಳನ್ನು ಸಹ ಎದುರಿಸುತ್ತಿದೆ ಎಂದು ತಿಳಿಸಿದರು.
ಮಾನವ ಅಭಿವೃದ್ಧಿ ಸೂಚ್ಯಂಕ 0 – 1 ವರೆಗೆ ಮಾಡಲಾಗುತ್ತದೆ. ರಾಜ್ಯಮಟ್ಟದ ಮಾನವ ಅಭಿವೃದ್ಧಿ ವರದಿ ಸಿದ್ಧಪಡಿಸಿದ್ದು ಮಧ್ಯಪ್ರದೇಶ 1999 ರಲ್ಲಿ, ನಂತರ 2005 ರಲ್ಲಿ ಕರ್ನಾಟಕ ರಾಜ್ಯ ಎರಡನೇ ರಾಜ್ಯವಾಗಿ ಸಿದ್ಧಪಡಿಸಿತ್ತು. ಈ ಹಿಂದೆ 2015 ರಲ್ಲಿ ಮಾನವ ಅಭಿವೃದ್ಧಿ ಸೂಚ್ಯಂಕ ಸಿದ್ಧಪಡಿಸಲಾಗಿತ್ತು. ಈಗ 2025 ರಲ್ಲಿ ಸಿದ್ಧಪಡಿಸಲಾಗುತ್ತಿದೆ. ಭಾರತದ ಮಾನವ ಅಭಿವೃದ್ಧಿ ಸೂಚ್ಯಂಕ 0.629 ಇದೆ. ರಾಜ್ಯದ ಮಾನವ ಅಭಿವೃದ್ಧಿ ಸೂಚ್ಯಂಕ 0.644 ಇದೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಗಳಾದ ಕೆ ಪಿ ಪ್ರಭುಸ್ವಾಮಿ, , ಪ್ರಾಧ್ಯಾಪಕರಾದ ಡಾ. ನವಿತಾ ತಿಮ್ಮಯ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
